Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಶರಾವತಿ ನೀರು ತರುವ ಯೋಜನೆ ಕೈಬಿಡಿ, ಪಶ್ಚಿಮಘಟ್ಟ ಉಳಿಸಿ - ನಾ.ಡಿಸೋಜಾ, ಮೂಲೆಗದ್ದೆ ಶ್ರೀ ಸೇರಿದಂತೆ ನಾಡಿನ ಪ್ರಜ್ಞಾವಂತರಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ಹೊಸನಗರ : ನಾಡಿಗೆ ಬೆಳಕು ನೀಡಿದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಅವೈಜ್ಞಾನಿಕ ಹಾಗೂ ಪರಿಸರಕ್ಕೆ ಮಾರಕವಾದ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಾಹಿತಿ ನಾ.ಡಿಸೋಜಾ, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ನಾಗೇಶ್ ಹೆಗಡೆ, ಹೆಗ್ಗೋಡಿನ ಪ್ರಸಿದ್ಧ ರಂಗಕರ್ಮಿ ಚಿದಂಬರ ರಾವ್ ಜಂಬೆ ಸೇರಿದಂತೆ ನಾಡಿನ ಸಾಹಿತಿಗಳು, ಚಿಂತಕರು, ಪರಿಸರ ಹೋರಾಟಗಾರರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಈ ಯೋಜನೆ ಕೈ ಬಿಡುವಂತೆ ಆಗ್ರಹಿಸಿ ಪತ್ರವನ್ನು ಬರೆದಿದ್ದು, ಈ ಪತ್ರಕ್ಕೆ ನಿಮ್ಮ ಸಹಿ ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಶರಾವತಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆಗೆ ನಿಮ್ಮ ವಿರೋಧವನ್ನು ದಾಖಲಿಸಬಹುದಾಗಿದೆ. ಪತ್ರ ಈ ಕೆಳಕಂಡಂತಿದೆ.

’ಯಾವುದೇ ಮಿತಿ ಇಲ್ಲದೆ, ವೈಜ್ಞಾನಿಕ ಯೋಜನೆ ಇಲ್ಲದೆ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಬೇಡಿಕೆ ನೀಗಿಸಲು ರಾಜ್ಯ ಸರ್ಕಾರ ಈಗ ಮತ್ತೊಮ್ಮೆ ಶರಾವತಿ ನದಿಯ ಮೇಲೆ ಕಣ್ಣು ಹಾಕಿದೆ.

ಬೆಂಗಳೂರಿನಿಂದ 380 ಕಿ.ಮೀ. ದೂರದಲ್ಲಿರುವ, ಜಗತ್ತಿನ ಅತ್ಯಪರೂಪದ ಅತಿ ಸೂಕ್ಷ್ಮ ಜೀವ ವೈವಿಧ್ಯದ ಕಣಿವೆಯಾದ ಶರಾವತಿ ಕೊಳ್ಳದಿಂದ ನೀರು ತರುವ ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರ ಮತ್ತೆ ಮುಂದಾಗಿದೆ. ಆದರೆ ಈ ಯೋಜನೆ ಕೇವಲ ಶರಾವತಿ ಕೊಳ್ಳವಷ್ಟೇ ಅಲ್ಲದೆ,  ಪಶ್ಷಿಮಘಟ್ಟದ ಪರಿಸರ ಸಮತೋಲನದ ಮೇಲೆ ಅಪಾಯಕಾರಿ ಪರಿಣಾಮಗಳನ್ನು ಬೀರಲಿದೆ ಎಂದು ಈಗಾಗಲೇ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಸೇರಿದಂತೆ ಹಲವು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, 2019ರಲ್ಲಿ ಕೂಡ ಅಂದಿನ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರವೂ ಶರಾವತಿ ನೀರನ್ನು ಬೆಂಗಳೂರಿಗೆ ತರುವ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಮುಂದಾಗಿತ್ತು. ಆಗ ಶರಾವತಿ ಕೊಳ್ಳದ ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಗಳ ಜನ ದೊಡ್ಡ ಮಟ್ಟದ ಪ್ರತಿರೋಧ ವ್ಯಕ್ತಪಡಿಸಿದ್ದರು. ತಿಂಗಳುಗಟ್ಟಲೆ ನಡೆದ ನಿರಂತರ ಹೋರಾಟಕ್ಕೆ ಮಣಿದ ಸರ್ಕಾರ, ಯೋಜನೆ ಕಾರ್ಯಸಾಧುವಲ್ಲ, ಹಾಗಾಗಿ ಆ ಯೋಚನೆ ಕೈಬಿಡಲಾಗಿದೆ ಎಂದು ಘೋಷಿಸಿತ್ತು.

ಐದು ವರ್ಷಗಳಲ್ಲೇ ಸರ್ಕಾರ ಮತ್ತೊಮ್ಮೆ ಶರಾವತಿ ನದಿ ನೀರಿನ ಮೇಲೆ ಕಣ್ಣು ನೆಟ್ಟಿದೆ.

ಆದರೆ, ರಾಜ್ಯದ ಅತ್ಯಂತ ಅಪರೂಪದ ಸಿಂಗಳೀಕ (ಲೈಯನ್ ಟೇಲ್ಡ್ ಮಕಾಕಿ-ಎಲ್‌‌ಟಿಎಂ) ಸಂರಕ್ಣಿತ ಅಭ್ಯಯಾರಣ್ಯವನ್ನೂ ಒಳಗೊಂಡಂತೆ ಮಹತ್ವದ ಜೀವ ಸಂಕುಲ, ಸಾವಿರಾರು ಎಕರೆ ಕಾಡು ಮತ್ತು ರೈತಾಪಿ ಜನರ ಜಮೀನು ನಾಶ ಮಾಡಿ, 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಜನರ ತೆರಿಗೆ ಹಣ ಪೋಲು ಮಾಡುವ ಈ ಯೋಜನೆ ಬಗ್ಗೆ ನಮ್ಮ ಸ್ಪಷ್ಟ ವಿರೋಧವಿದೆ. ಯಾಕೆಂದರೆ, ಜೀವ ನದಿಯನ್ನು ಬತ್ತಿಸಿ ಬೆಂಗಳೂರಿಗೆ ನೀರು ತರುವುದು ವೈಜ್ಞಾನಿಕವಾಗಿ ಮಾತ್ರವಲ್ಲದ, ವಿವೇಚನೆಯ ದೃಷ್ಟಿಯಿಂದಲೂ ಒಪ್ಪುವಂತಹ ಚಿಂತನೆಯಲ್ಲ.

ಅಲ್ಲದೆ, ಎತ್ತಿನ ಹೊಳೆ ಯೋಜನೆ ಗಮನಿಸಿದರೆ ಇದು ಮೂಲತಃ ಗುತ್ತಿಗೆದಾರರ ಮೂಲಕ ಭ್ರಷ್ಟಾಚಾರದ ಹೊಳೆ ಹರಿಸುವ ಇನ್ನೊಂದು ಯೋಜನೆಯಾಗಲಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.

ಅದರಲ್ಲೂ ನಮ್ಮದೇ ಅಂಕೋಲದ ಶಿರೂರು, ನೆರೆಯ ಕೇರಳದ ವಯನಾಡಿನಲ್ಲಿ ಆಗಿರುವ ಬೆಚ್ಚಿಬೀಳಿಸುವ ದುರಂತಗಳು ಕಣ್ಣೆದುರೇ ಇರುವಾಗ ಪಶ್ಚಿಮಘಟ್ಟದ ಪ್ರಾಕೃತಿಕ ರಚನೆಯನ್ನೇ ಬುಡಮೇಲು ಮಾಡುವ ಇಂತಹ ಯೋಜನೆಗಳ ಬದಲು, ಪರಿಸರ ಸ್ನೇಹಿ ಪರ್ಯಾಯ ವ್ಯವಸ್ಥೆಯ ಬಗ್ಗೆ ಸರ್ಕಾರ ಯೋಚಿಸುವುದು ವಿವೇಕ. ಆದ್ದರಿಂದ ಶರಾವತಿ ನೀರು ತರುವ ಯೋಜನೆ ಕೈಬಿಟ್ಟು, ಬೆಂಗಳೂರಿಗೆ ಅಗತ್ಯವಿರುವ 15 ಟಿಎಂಸಿಗಿಂತ ಅಧಿಕ ನೀರು ಸಿಗುವ ಮಹಾನಗರದಲ್ಲಿ ಮಳೆ ನೀರು ಇಂಗಿಸುವ ಮತ್ತು ಕೆರೆಕಟ್ಟೆಗಳ ಪುನರುಜ್ಜೀವನ ಕೈಗೆತ್ತಿಕೊಳ್ಳುವುದು ವಿವೇಚನೆಯ ಮಾರ್ಗ.

ಆ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಶರಾವತಿ ನೀರು ತರುವ ಪರಿಸರ ಘಾತುಕ, ಜೀವ ವಿರೋಧಿ ಯೋಜನೆಯನ್ನು ಕೈಬಿಡಬೇಕು. ಆ ಮೂಲಕ ನಾಡಿನ ಕಾಡು ಮತ್ತು ನಾಡಿನ ಸ್ವಾಸ್ಥ್ಯ ಕಾಯುವ ತನ್ನ ಹೊಣೆಗಾರಿಕೆ ತೋರಬೇಕು ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಮೂಲಕ ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ.

ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟದ ಪರವಾಗಿ

ಸಹಿ/’


ಕಾಮೆಂಟ್‌ಗಳಿಲ್ಲ