Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಹೊಸನಗರದಲ್ಲಿ ಗ್ರಾಮ ಆಡಳಿತಾಧಿಕಾರಿ ಸಂಘದಿಂದ ಅನಿರ್ದಿಷ್ಟ ಕಾಲ ಎರಡನೇ ಹಂತದ ಮುಷ್ಕರ

ಹೊಸನಗರ : ರಾಜ್ಯ ಕಾರ್ಯನಿರತ ಗ್ರಾಮ ಆಡಳಿತ ಅಧಿಕಾರಿಗಳ ವೃಂದಕ್ಕೆ ಮೂಲ ಸೌಲಭ್ಯ ನೀಡುವುದು, ತಾಂತ್ರಿಕ ಹುದ್ದೆಗೆ ಸರಿಸಮಾನ ವೇತನ, ಸೇವಾ ವಿಷಯಕ್ಕೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸುವುದು, ಕಂದಾಯ ಇಲಾಖೆಯ ವರ್ಗಾವಣೆಗೆ ವಿಶೇಷ ಮಾರ್ಗಸೂಚಿ ರಚಿಸುವುದು, ಇ-ಪೌತಿ ಖಾತಾ ಅಂದೋಲನ ಕೈ ಬಿಡುವುದು, ಚಿಕ್ಕಮಗಳೂರು ಜಿಲ್ಲೆಯ 30 ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿ ತಡೆ ದಂಡನಾ ಆದೇಶವನ್ನು ಕೂಡಲೇ ಹಿಂಪಡೆಯುವುದು ಸೇರಿದಂತೆ ವಿವಿಧ ಹತ್ತು ಹಲವು ಬೇಡಿಕೆಗಳ ಈಡೇರಿಕೆಗಾಗಿ ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಅನಿರ್ದಿಷ್ಟ ಕಾಲದ ಮುಷ್ಕರಕ್ಕೆ ಸಿಬ್ಬಂದಿಗಳು ಮುಂದಾದರು.

ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ಮಾತನಾಡಿ, ಈ ಹಿಂದೆ ಸಂಘದ ಮೂಲಕ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರದ ವಿರುದ್ಧ ಹಕ್ಕೊತ್ತಾಯ ನಡೆಸಿ, ಅಗತ್ಯ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಷ್ಕರ ಕೈಬಿಡಲಾಗಿತ್ತು. ಆದರೆ, ಆ ಬಳಿಕ ಹಲವು ತಿಂಗಳೇ ಕಳೆದರೂ, ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಈಡೇರಿಕೆಗೆ ಮುಂದಾಗದಿರುವುದು ವಿಷಾದನೀಯ. ಈ ಕೂಡಲೇ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮಕ್ಕೆ ಸರ್ಕಾರ ಮುಂದಾಗಬೇಕು. ತಪ್ಪಿದಲ್ಲಿ ನಮ್ಮ ಹೋರಾಟ ನಿರಂತರ ಎಂದು ಸರ್ಕಾರದ ನಿರ್ಲಕ್ಷ್ಯಧೋರಣೆ ಖಂಡಿಸಿ, ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಮುಂದಾದರು.

ಮುಷ್ಕರಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಬಂಡಿ ಸೋಮಶೇಖರ್, ಪ್ರತಿಭಟನಾಕಾರರ ಹೋರಾಟ ನ್ಯಾಯ ಸಮ್ಮತವಾಗಿದ್ದು, ಹೋರಾಟ ತೀವ್ರ ‌ಸ್ವರೂಪ ಪಡೆಯುವ ಮೊದಲು ಸರ್ಕಾರ ಎಚ್ಚೆತ್ತುಕೊಳಬೇಕು ಎಂಬ ಎಚ್ಚರಿಕೆ ನೀಡಿದರು.

CLICK ಮಾಡಿ - ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಭೂತದಲ್ಲಿ ಲೀನವಾದ ಸಂಕೂರಿನ ವೀರ ಯೋಧ ಜಿ.ಎಸ್‌.ಮಂಜುನಾಥ್‌ - ಕಂಬನಿ ಮಿಡಿದ ಹೊಸನಗರ ತಾಲ್ಲೂಕಿನ ಜನತೆ

ಸಂಘದ ಖಜಾಂಚಿ ಗಣೇಶ್ ಮಾತನಾಡಿ, ತಾಲ್ಲೂಕಿನ ಒಟ್ಟು 30 ವೃತ್ತಗಳಲ್ಲಿ ಕೇವಲ 17 ಗ್ರಾಮ ಆಡಳಿತ ಸಿಬ್ಬಂದಿಗಳು ಬಹಳ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಖಾಲಿ ಹುದ್ದೆಗಳಿಗೆ ಹೊಸ ನೇಮಕಾತಿ ಮೂಲಕ ಭರ್ತಿಗೆ ಮುಂದಾಗಬೇಕೆಂದು ಮನವಿ ಮಾಡಿದರು.‌

ಈ ವೇಳೆ ಕಾರ್ಯದರ್ಶಿ ಸಿದ್ದಪ್ಪ ಚೂರೇರ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಹಲವು ಸಿಬ್ಬಂದಿಗಳು ಮುಷ್ಕರದಲ್ಲಿ ಭಾಗವಹಿಸಿದ್ದರು. ಶಾಸಕ ಗೋಪಾಲಕೃಷ್ಣ ಬೇಳೂರು ಪರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜುನಾಥ್ ಮನವಿ ಸ್ವೀಕರಿಸಿ, ರಾಜ್ಯ ಸರ್ಕಾರದ ಗಮನ ಸೆಳೆಯುವ ಭರವಸೆ ನೀಡಿದರು.

ಕಾಮೆಂಟ್‌ಗಳಿಲ್ಲ