ಹೊಸನಗರ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರಿಗೆ ಒಂದು ದಿನದ ಯಶಸ್ವಿ ತರಬೇತಿ ಕಾರ್ಯಾಗಾರ
ಹೊಸನಗರ : ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರಿಗೆ ಇಂದು ಇಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. ರಸಗೊಬ್ಬರ, ಕೀಟನಾಶಕ ಹಾಗೂ ಬಿತ್ತನೆ ಬೀಜ ಮಾರಾಟಗಾರರಿಗೆ ಮುಂದಿನ ಮುಂಗಾರು ಹಂಗಾಮಿನ ಸಿದ್ಧತೆಗೆ ಸಂಬಂಧಿಸಿದಂತೆ ಹೊಸನಗರ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ, ಶಿವಮೊಗ್ಗ ಜಾರಿದಳ ಸಹಾಯಕ ಕೃಷಿ ನಿರ್ದೇಶಕ ಶಶಿಧರ್ ಕಾರ್ಯಾಗಾರದಲ್ಲಿ ಅಗತ್ಯ ತರಬೇತಿಯನ್ನು ನೀಡಿದರು.
ಕೃಷಿ ಪರಿಕರಗಳ ಕಾನೂನುಗಳು ಉಲ್ಲಂಘನೆಯಾಗದಂತೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕೃಷಿ ಪರಿಕರಗಳನ್ನು ಹೇಗೆ ಮಾರಾಟ ಮಾಡಬೇಕು? ರೈತರಲ್ಲಿ ಅಗತ್ಯಕ್ಕೆ ತಕ್ಕಂತೆ ಕಳೆನಾಶಕ ಹಾಗೂ ಸುರಕ್ಷಿತ ಕೀಟನಾಶಕದ ಬಳಕೆಯ ಕುರಿತು ಅರಿವು ಮೂಡಿಸುವುದು ಹೇಗೆ? ಅಲ್ಲದೆ ಹೆಚ್ಚಿನ ಲಾಭದಾಸೆಗೆ ಬಿದ್ದು ಕಳಪೆ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಮಾರಾಟ ಮಾಡಿದಲ್ಲಿ, ಕಾನೂನುಗಳ ಉಲ್ಲಂಘನೆಯಾದಲ್ಲಿ ಕೃಷಿ ಇಲಾಖೆ ಮಾರಾಟಗಾರರ ಹಾಗೂ ಉತ್ಪಾದಕರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಲಿದೆ? ಏನೇನು ಶಿಕ್ಷೆಗಳು ಇರಲಿವೆ? ಎಂಬ ವಿಷಯಗಳ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಾಗಾರದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಹೆಗಡೆ, ತಾಲ್ಲೂಕಿನಲ್ಲಿ ಈಗಾಗಲೇ ಪೂರ್ವ ಮುಂಗಾರು ಮಳೆಗಳು ಆರಂಭವಾಗಿದ್ದು, ರೈತರು ಮುಂಗಾರಿಗೆ ಭೂಮಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಕೃಷಿ ಇಲಾಖೆಯೂ ಕೂಡ ಮುಂಗಾರು ಹಂಗಾಮಿಗೆ ಸಜ್ಜಾಗಿದ್ದು, ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
CLICK ಮಾಡಿ - ಕೋಡೂರು ಶಾಂತಪುರ ಬಳಿ ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿ - ಓರ್ವ ಸಾವು, ಮೂವರಿಗೆ ಗಂಭೀರ ಗಾಯ
ಈ ಬಾರಿ ಏಪ್ರಿಲ್ ತಿಂಗಳವರೆಗೆ ತಾಲ್ಲೂಕಿನಲ್ಲಿ ವಾಡಿಕೆ 40ಮಿ. ಮೀ. ಗಿಂತ ಶೇ. 70 ಹೆಚ್ಚು ಅಂದರೆ, 70 ಮಿ. ಮೀ. ಮಳೆಯಾಗಿದ್ದು, ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ತಾಲ್ಲೂಕಿನಲ್ಲಿ ಸೂಕ್ತವಾಗಿ ಲೈಸೆನ್ಸ್ ಪಡೆಯದೇ, ದಿನಸಿ ಅಂಗಡಿಗಳಲ್ಲಿ ಹಾಗೂ ಹಾರ್ಡ್ವೇರ್ ಅಂಗಡಿಗಳಲ್ಲಿ ಮೈಲುತುತ್ತ ಹಾಗೂ ಸುಣ್ಣವನ್ನು ಮಾರಾಟ ಮಾಡುತ್ತಿದ್ದು, ಇದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಅಲ್ಲದೆ ಪಿಕಪ್ ವಾಹನಗಳಲ್ಲಿ ತೆಗೆದುಕೊಂಡು ಬಂದು, ಮೈಲುತುತ್ತ ಮಾರಾಟ ಮಾಡುತ್ತಿರುವ ಪ್ರಸಂಗಗಳೂ ವರದಿಯಾಗಿದ್ದು, ಇವರ ಮೇಲೆ ಕೃಷಿ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ರೈತರು ಸಹ ಎಚ್ಚರಿಕೆಯಿಂದ ಲೈಸೆನ್ಸ್ ಪಡೆದ ಅಂಗಡಿಗಳಿಂದಲೇ ಉತ್ತಮ ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪಡೆದು ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಈ ಕುರಿತಾದ ಎಚ್ಚರಿಕೆ ಪ್ರಕಟಣೆಯನ್ನು ಬಿಡುಗಡೆಗೊಳಿಸಲಾಯಿತು.
ರಿಪ್ಪನ್ಪೇಟೆ ಕೃಷಿ ಅಧಿಕಾರಿ ಸುಶಾಂತ್ ಹಾಗೂ ಇತರ ಅಧಿಕಾರಿಗಳು ಕಾರ್ಯಾಗಾರದಲ್ಲಿ ಹಾಜರಿದ್ದರು.
ಕಾಮೆಂಟ್ಗಳಿಲ್ಲ